ಸೋಲು, ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು: ಸಿಎಂ
ಬೆಂಗಳೂರು: ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾದ್ಯಮದವರೊಂದಿಗೆ ಮಾತನಾಡಿದರು.
ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಂಧಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ ಹಾಗೂ ಮತಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.
ಹಾನಗಲ್ ಸೋಲಿನ ಕುರಿತು ನಾವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದ್ದೇವೆ. ಈ ಅಂತರವನ್ನು ನಾವು ಸಾಧಿಸಬಹುದಾಗಿತ್ತು. ಕಾರಣಗಳನ್ನು ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಿ ಮುಂದೆ ಹೋಗುವ ಕೆಲಸವನ್ನು ಮಾಡುತ್ತೇವೆ ಎಂದರು.
ಹಾನಗಲ್ ನಲ್ಲಿ ದಿ.ಸಿ.ಎಂ.ಉದಾಸಿಯವರಿಗಿದ್ದ ಜನಪ್ರಿಯತೆಯನ್ನು ಸ್ವಲ್ಪಪಟ್ಟಿಗೆ ಮುಂದುವರೆಸಲಾಗಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಜನ ಅವರನ್ನು ಬೆಂಬಲಿಸಿದ್ದಾರೆ ಎಂದರು.
ಸರ್ಕಾರದ 100 ದಿನ:
ಮುಖ್ಯಮಂತ್ರಿಯಾಗಿ 100 ದಿನಗಳಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಒಂದು ವರ್ಷದಂತೆ ಪ್ರಮುಖ ಘಟ್ಟವೇನಲ್ಲ. ಆದರೆ, 100 ದಿನದಲ್ಲಿ ಸರ್ಕಾರದ ದಿಕ್ಕು, ಭರವಸೆ, ಸಮಸ್ಯೆಗಳನ್ನು ಎದುರಿಸಿದ ರೀತಿ, ಇವುಗಳ ಸ್ಥೂಲ ಮಾಹಿತಿ ನೀಡಲಾಗುವುದು ಎಂದರು.
ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಉಪಚುನಾವಣೆ ಫಲಿತಾಂಶ ದಿಕ್ಸೂಚಿ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ವಿರೋಧ ಪಕ್ಷದವರು ಹಾಗೆ ಹೇಳಬೇಕು. ಸಿಂಧಗಿಯಲ್ಲಿ 31000 ದ ದೊಡ್ಡ ಅಂತರದಿಂದ ಕಾಂಗ್ರೆಸ್ ಸೋತಿದೆ. ಅದಕ್ಕೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.