IT Raid : ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮೇಲೆ ದಾಳಿ ನಡೆದಿದೆ.
ನಗರದ ರಾಜಾಜಿನಗರದ ಭಾಷ್ಯಂ ಸರ್ಕಲ್ನಲ್ಲಿರುವ ಉಮೇಶ್ ಮನೆ ಮತ್ತು ಕಚೇರಿ ಸೇರಿ ಅವರಿಗೆ ಸಂಬಂಧಪಟ್ಟ ಇತರೆ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಆಪ್ತ ಸಹಾಯಕನಾಗಿ ರೀತಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಬಿಎಂಟಿಸಿ ಬಸ್ ಕಂಡಕ್ಟರ್ ಆಗಿದ್ದ ಉಮೇಶ್.!
ಯಡಿಯೂರಪ್ಪ ಮುಖ್ಯಮಂತ್ರಿ ಅವರಿಗೆ ಆಪ್ತ ಸಹಾಯಕ ಆಗುವ ಮೊದಲು ಉಮೇಶ್ ಬಿಎಂಟಿಸಿ ಬಸ್ ಕಂಡಕ್ಟರ್ ಕಂ ಡ್ರೈವರ್ ಆಗಿದ್ದರು. ಯಲಹಂಕದ ಪುಟ್ಟೇನಹಳ್ಳಿ ಬಿಎಂಟಿಸಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಉಮೇಶ, ಡೆಪ್ಯುಟೇಷನ್ ಮೇಲೆ ಬಿಎಸ್ವೈ ಆಪ್ತನಾಗಿ ಕೆಲಸ ಮಾಡುತ್ತಿದ್ದರು.
ಭಾಷ್ಯಂ ಸರ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಉಮೇಶ್ ವಾಸವಾಗಿದ್ದರು, ಇಂದು ಐಟಿ ಅಧಿಕಾರಿಗಳು ಅದೇ ಮನೆಯ ಮೇಲೆ ದಾಳಿ ನಡೆಸಿದ್ದಾರೆ.