ಬೆಂಗಳೂರು: ಸ್ಯಾಂಡಲ್ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮೊದಲು ಗಣ್ಯಾತಿ ಗಣ್ಯರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಮೇಲೆ ಪುಷ್ಪ ಗುಚ್ಛ ಅರ್ಪಿಸಿದ ನಂತರ ಪೊಲೀಸ್ ವಾದ್ಯಗೋಷ್ಠಿಯಿಂದ ರಾಷ್ಟ್ರ ಗೀತೆ ಮೊಳಗಿತು. ಅಲ್ಲದೆ, ಅದೇ ಸಂದರ್ಭದಲ್ಲಿ ಪೊಲೀಸರು ಮೂರು ಬಾರಿ ಕುಶಾಲ ತೋಪು ಸಿಡಿಸಿದರು. ತದ ನಂತರ, ಎರಡು ನಿಮಿಷಗಳ ಮೌನ ಆಚರಿಸಲಾಯಿತು.
ಇದಾದ ಕೂಡಲೇ, ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಹಸ್ತಾಂತರಿಸಿದರು.
ಪೊಲೀಸರು ಮೊಳಗಿಸಿದ ಶೋಕ ಗೀತೆ ಹಾಗೂ ರಾಷ್ಟ್ರ ಗೀತೆಯ ನಂತರ ಅಗಲಿದ ನಟನಿಗೆ ಸರ್ಕಾರದ ಗೌರವ ಸಮರ್ಪಣಾ ಕಾರ್ಯಕ್ರಮ ಪೂರ್ಣ ಗೊಂಡಿತು. ನಂತರದಲ್ಲಿ ನಡೆದ ಕೌಟುಂಬಿಕ ಕಾರ್ಯಕ್ರಮದಲ್ಲಿ ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರವನ್ನು ಇರಿಸಿ ಮೂರು ಬಾರಿ ಪ್ರದಕ್ಷಿಣೆ ಮಾಡಿಸಿ, ಗುಂಡಿಯೊಳಗೆ ಪಾರ್ಥಿವ ಶರೀರವನ್ನು ಇಳಿಸಲಾಯಿತು.
ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನ :
ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ತಾಯಿ ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ನಡೆಸಲಾಯಿತು. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನ ನಡೆಸಲಾಯಿತು. ರಾಘವೇಂದ್ರ ರಾಜ್ಕುಮಾರ್ ಮಗ ವಿನಯ್ ರಾಜ್ಮಾರ್ ಅಂತಿಮ ಸಂಸ್ಕಾರ ನೆರವೇರಿಸಿದರು.
ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಕುಟುಂಬಸ್ಥರ ಜೊತೆಯಲ್ಲಿ ಗಣ್ಯರೂ ಕೂಡಾ ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಉಪ್ಪು ಮತ್ತು ಮಣ್ಣು ಸಮರ್ಪಿಸುವುದರೊಂದಿಗೆ ಪುನೀತ್ ರಾಜಕುಮಾರ್ ಎಂಬ ಕಲಾಲೋಕದ ತಾರೆ ಮಣ್ಣಲ್ಲಿ ಮಣ್ಣಾಗಿ ಬೆರೆತಾಗ, ಎಲ್ಲರ ಕಣ್ಣಾಲಿಗಳು ತುಂಬಿದ್ದವು ಹಾಗೂ ಹೃದಯ ಭಾರವಾಗಿದ್ದವು.
ಲೋಹಿತ್ ಎಂಬ ಹೆಸರಿನಲ್ಲಿ ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜಕುಮಾರ್ ಎಂಬ ತಾರೆ ಮಿಂಚಿ ಮರೆಯಾದರೂ, ಕನ್ನಡಿಗರ ಹೃದಯದಲ್ಲಿ ಮಾತ್ರ ಚಿರಸ್ಥಾಯಿಯಾಗಿ ನೆಲೆಸುತ್ತಾರೆ ಎಂಬುದಂತೂ ನಿಶ್ಚಿತ.
ಇದಕ್ಕೂ ಮುನ್ನ ಮೆರವಣಿಗೆ ಮೂಲಕ ಕಂಟೀರವ ಸ್ಟುಡಿಯೊಕ್ಕೆ ಕರೆತರಲಾಯಿತು. ನಂತರ ಡಾ. ರಾಜ್ಕುಮಾರ್ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮುಂಭಾಗ ಜಮಾಯಿಸಿದ್ದರು.
ಕಂಠೀರವ ಸ್ಟುಡಿಯೋ ಬಳಿ 144 ಸೆಕ್ಷನ್ ಜಾರಿ:
ಮಂಗಳವಾರ ಪುನೀತ್ ಸಮಾಧಿಗೆ ಹಾಲು-ತುಪ್ಪ ಬಿಡುವ ಕಾರ್ಯ ಇದೆ. ಅಲ್ಲಿ ವರೆಗೂ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಂಠೀರವ ಸ್ಟುಡಿಯೋ ಬಳಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿಕೊಂಡು ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಿದೆ ಎಂದು ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ.
ಶುಕ್ರವಾರ, ಅಕ್ಟೋಬರ್ 29 ನಟ ಪುನೀತ್ ರಾಜ್ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು.ಇದು ನಂಬಲಾಗದ, ಅರಗಿಸಿಕೊಳ್ಳಲಾಗದ ಸುದ್ದಿಯಾಗಿತ್ತು. ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯಲು ದೂರದೂರುಗಳಿಂದ ಬಂದಿದ್ದರು. ವರದಿಗಳ ಪ್ರಕಾರ, ಕಳೆದ ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾದ ಕೆ ಗೋಪಾಲಯ್ಯ, ಆರ್ ಅಶೋಕ್, ಮುನಿರತ್ನ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ, ಪುತ್ರಿಯರಾದ ಧೃತಿ ಮತ್ತು ವಂದಿತಾ, ಸೋದರರಾದ ಶಿವ ರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್, ಕುಟುಂಬಸ್ಥರಲ್ಲಿ ಪ್ರಮುಖರಾದ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ, ಚಿತ್ರ ರಂಗದ ಹೆಸರಾಂತ ಕಲಾವಿದರಾದ ವಿ. ರವಿಚಂದ್ರನ್, ಶಶಿಕುಮಾರ್, ಉಪೇಂದ್ರ, ಜಗ್ಗೇಶ್, ಸುದೀಪ್, ದುನಿಯಾ ವಿಜಿ, ಗಣೇಶ್, ವಿಜಯ ರಾಘವೇಂದ್ರ, ಶ್ರೀ ಮುರಳಿ, ಸಾಧು ಕೋಕಿಲ, ಉಮಾಶ್ರೀ, ತಾರಾ ಅನುರಾಧಾ, ಶೃತಿ, ರಶ್ಮಿಕಾ ಮಂದಣ್ಣ, ರಚಿತಾ ರಾಮ್, ಚಿತ್ರೋದ್ಯಮದ ಗಣ್ಯರಾದ ಸಾ ರಾ ಗೋವಿಂದು, ರಾಕ್ ಲೈನ್ ವೆಂಕಟೇಶ್, ಅಭಿಮಾನಿಗಳ ಸಾಗರವೇ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರದ ಅಂತಿಮ ಕ್ಷಣಗಳನ್ನು ಕಣ್ತುಂಬಿಕೊಂಡರು.